ಬುಧವಾರ, ಜುಲೈ 17, 2013

ಮನೆಯಂಗಳದ ರಾಜಕುಮಾರಿ

ಛಾಯಾಚಿತ್ರ : ಚರಿತಾ


        ಕ್ವಾಟರ್ಸ್ ಮನೆಯಲ್ಲಿ, ಬೆಡ್ ರೂಂ ಕಿಟಕಿಯ ತುಂಬ ಕಾಣುತ್ತಿದ್ದದ್ದು ಈ ಮರ. ಇದರ ರೆಂಬೆಕೊಂಬೆಗಳು ಹರಡಿದ್ದಷ್ಟಗಲವೂ ಇದರದ್ದೇ ಜಾಗ. ಉಯ್ಯಾಲೆ ತೂಗಲೆಂದೇ ಇದ್ದ ಗಟ್ಟಿರಟ್ಟೆಯಂಥ ರೆಂಬೆಯ ಅಷ್ಟಗಲ ಮಾತ್ರ ಸವೆದು, ನುಣ್ಣಗೆ ಹೊಳಪಾಗಿತ್ತು. ಉಳಿದ ಮೈಯೆಲ್ಲ ಒರಟು. ನಾವು ಸುಲಭವಾಗಿ ಹತ್ತಿಳಿಯಲು ತಕ್ಕನಾಗಿದ್ದ ಮರ. ಮನೆತುಂಬ ಇರುತ್ತಿದ್ದ ನೆಂಟರು, ಪರಿಚಿತರ ಕಣ್ತಪ್ಪಿಸಿ ನಾನಿರುತ್ತಿದ್ದದ್ದು ಈ ಮರದ ನೆರಳಲ್ಲೇ. ಉಯ್ಯಾಲೆ ಜೀಕುತ್ತ ಅದು ಹೊರಡಿಸುತ್ತಿದ್ದ ಸಣ್ಣ ಸದ್ದು, ಕಥೆ ಹೇಳುತ್ತಿದ್ದ ನನ್ನಮ್ಮನ ದನಿಯಂತೆಯೇ ಕೇಳುತ್ತಿತ್ತು. ರಾತ್ರಿ ಆಕಳಿಸಿದಾಗೆಲ್ಲ ಇಷ್ಟಿಷ್ಟು ಉದುರಿದ್ದ ಪರಿಮಳದ ಮರಿಗಳು ಬೆಳಗಿನ ಜಾವದ ಇಬ್ಬನಿಯಲ್ಲಿ ಮಿಸುಕಾಡುತ್ತ ತಿಳೀ ಬೆಳಕಿಗೆ ಕಣ್ಬಿಡುವ ಹೊತ್ತಿಗೆ ಸರಿಯಾಗಿ ನಾನೂ ಅಲ್ಲಿದ್ದೆ. ಆವತ್ತು ಸ್ವಲ್ಪ ಆತುರದಲ್ಲೇ ಕೈಗೆ ಸಿಕ್ಕಷ್ಟು ಹೆಕ್ಕಿ, ಕವರಿಗೆ ತುಂಬಿಕೊಂಡು ಶಾಲೆ ಕಡೆಗೆ ಓಡಿದ್ದೆ. ಆಗಸ್ಟ್ ಹದಿನೈದರ ಬಾವುಟ ಮೇಲೆ ಹಾರಿ ಮೈಕೊಡವಿದಾಗ ಇದರದ್ದೇ ಪರಿಮಳ! ಎಷ್ಟು ಖುಶಿಯಾಗಿತ್ತು ನಂಗೆ!

       ಈಗ ಹೊಸ ಮನೆಗೆ ಹೆಸರಿಡುವ ಸರದಿ ಬಂದಾಗ ನಾನು ಸೂಚಿಸಿದ್ದು ಇದರದ್ದೇ ಹೆಸರು - 'ಪಾರಿಜಾತ'. ನಮ್ಮ ಮನೆಯಂಗಳದಲ್ಲಿ ಪ್ರೀತಿ ಚೆಲ್ಲುತ್ತ ನಿಂತಿರುವ ಪರಿಮಳದ ಪಾರಿಜಾತ. ಈ ಒಂದೊಂದೇ ಹೂವನ್ನು ಆಯುವುದು ನೀವಂದುಕೊಂಡಿರುವಷ್ಟು ಸುಲಭವಲ್ಲವೇ ಅಲ್ಲ. ಇದರ ಬಿಳಿಪಕಳೆಗಳಿಗೆ ಒಂಚೂರೂ ನೋವು ತಿಳಿಯದಹಾಗೆ ಆಯಬೇಕೆಂದರೆ, ನಿಮ್ಮ ಅಂಗೈಯ್ಯನ್ನು ಈ ಹೂವಿಗಿಂತಲೂ ಹಗುರ ಮಾಡಿಕೊಳ್ಳಬೇಕು! ಎಳೇಕೂಸಿನ ತುಟಿಯಂಥ ತೊಟ್ಟುಗಳಿಗೆ ಅಳುತಾಕದ ಹಾಗೆ ಎರಡೇ ಬೆರಳಲ್ಲಿ ಹಿಡಿದು, ಹಿಡಿದದ್ದು ನನಗೂ ತಿಳಿಯಲೇಯಿಲ್ಲವೇನೊ ಅನ್ನುವಹಾಗೆ ಒಂದೊಂದನ್ನೆ ಬಟ್ಟಲು ತುಂಬುವಷ್ಟರಲ್ಲಿ ಉಸಿರೇ ಅಂಗೈಗೆ ಬಂದು ಕುಳಿತಿರುತ್ತೆ! "ಉಹ್ಹ್ ಸಾಕಪ್ಪ" ಅಂತ ಸ್ವಲ್ಪ ಜೋರಾಗಿ ಉಸಿರೆಳೆದುಬಿಡುವಹಾಗಿಲ್ಲ... ಮತ್ತೆ ಅವುಗಳು ಪ್ಯಾರಾಶೂಟ್ ಥರ ಹಾರುತ್ತ, ಗರಿಕೆಗೆ ತಗುಲಿಕೊಳ್ಳಲು ಇಷ್ಟೇ ನೆಪ ಸಾಕು!



ಛಾಯಾಚಿತ್ರ : ಚರಿತಾ

    
        ಇಂಥಾ ಸುಕುಮಾರಿಯನ್ನು ಮನೆತುಂಬಿಸಿಕೊಳ್ಳುವ ಆಟ ನನಗೂ ಇಷ್ಟ. ಅಮ್ಮ ಚಿಕ್ಕಹುಡುಗಿಯಾಗಿದ್ದಾಗ ಅದೇ ಬಿಳಿಪಿಂಗಾಣಿ ಬಟ್ಟಲಿನಲ್ಲಿ ಊಟ ಮಾಡುತ್ತಿದ್ದಿದ್ದಂತೆ. ಬಿಳಿ ಕಣಗಿಲೆ ಆಕಾರದ, ಸ್ವಲ್ಪ ಒಳತಗ್ಗಿರುವ ಅಂದದ ಬಟ್ಟಲು ಅದು. ಈಗ ನಮ್ಮಂಗಳದ ಸುಕುಮಾರಿಗೂ, ಅಮ್ಮನ ಈ ಕಣಗಿಲೆ ಬಟ್ಟಲಿಗೂ ಸ್ನೇಹ. ಮನೆತುಂಬ ಘಮ್ಮನೆ ಸಂಭ್ರಮಿಸುವ ಖುಶಿ! ಬಿಳಿಬಟ್ಟಲ ನೀರಿನಲ್ಲಿ ಬೆಳ್ಳಗೆ ನಗುತ್ತ, ಹರಟೆಕೊಚ್ಚಲು ಕುಳಿತುಬಿಡುವ ಪಾರಿಜಾತಕ್ಕೆ, "ಸಾಕು ಮಾರಾಯ್ತಿ. ಅದೆಷ್ಟು ನಗ್ತೀಯೆ ನೀನು" ಅಂತ ಮುದ್ದಿಂದ ಗದರುವ ತನಕ ಎಚ್ಚರ ಇರೋದಿಲ್ಲ. ಅಷ್ಟು ನಗುಪುರ್ಕಿ.  ಅಷ್ಟೇ ತರಲೆ ಕೂಡ. ನಾನು ಮನೆಯಿಂದ ಹೊರಹೋಗೋದಕ್ಕೆ ಅಂತ ಗೇಟ್ ತೆಗೆದರೆ ಈಷ್ಟಗಲ ಹರಡಿಕುಳಿತು, ಕಾಲಿಡಲೂ ಜಾಗ ಕೊಡದೆ ಸತಾಯಿಸುವ ಹುಡುಗಿ. ಎಲ್ಲಿ ತುಳಿದುಬಿಡ್ತೀನೊ ಅಂತ ಇಷ್ಟಿಷ್ಟೆ ತುದಿಗಾಲಲ್ಲಿ ಜಾಗಮಾಡಿಕೊಂಡು ಅಂಗಳದಾಟುವ ನನ್ನ ಪಾಡು ನೋಡಿ ಇವಳಿಗೆ ನಗುವೋ ನಗು!  

 ಹೀಗಿರುವ ಈ ಹರಟೆಮಲ್ಲಿಯ ಜನ್ಮಾಂತರದ ಒಂದು ಕಥೆ ಇದೆ. ನಾನು ಎಲ್ಲೋ ಓದಿದ್ದ ಒಂದು ವಿದೇಶೀ ಜಾನಪದ ಕಥೆ :
ಒಂದಾನೊಂದು ಕಾಲದಲ್ಲಿ ಒಬ್ಬ ರಾಜನಿಗೆ ಒಬ್ಬಳೇ ಮುದ್ದಾದ, ಸುಂದರಿ ರಾಜಕುಮಾರಿ. ಅವಳಿಗೆ ಒಮ್ಮೆ ಆ ಸೂರ್ಯನ ಮೇಲೆ ಮೋಹವುಂಟಾಯ್ತಂತೆ. ಅವನ ತೇಜಸ್ಸು, ಬಣ್ಣ, ಶಕ್ತಿಗೆ ಯಾರು ತಾನೆ ಮರುಳಾಗದವರು?! ಅವನಿಗೆ ತನ್ನ ಪ್ರೇಮ ನಿವೇದಿಸಿಕೊಂಡಿದ್ದೂ ಆಯ್ತು. ಆ ಸೂರ್ಯ ಅನ್ನೋ ಸೂರ್ಯನೂ ಅವಳ ಜೊತೆ ಸಾಕಷ್ಟು ಸಲುಗೆ ಬೆಳೆಸಿಕೊಂಡು, ಸರಿಯಾದ ಸಮಯನೋಡಿ 'ಟಾಟಾ' ಅಂದನಂತೆ. ಈ ರಾಜಕುಮಾರಿಯ ಗೋಳು ಕೇಳುವವರ್ಯಾರು?  ಸ್ವತಃ ಮಹಾರಾಜನೇ ಸೂರ್ಯನೆಂಬೋ ಸುಂದರಾಂಗನನ್ನು  ಬೇಡಿಕೊಂಡಾಗಲೂ ಆತ 'ಕ್ಯಾರೇ' ಅನ್ನಲಿಲ್ಲ. ಇತ್ತಕಡೆ ನಮ್ಮ ರಾಜಕುಮಾರಿಯ ಪಾಡು ದಿನೇದಿನೇ ಕೆಡುತ್ತಾ ಬಂತು. ಅನ್ನ-ನೀರು ಬಿಟ್ಟು, ನಿದ್ದೆ-ನಗು ಬಿಟ್ಟು, ಬಿಳುಚಿಕೊಂಡು, ಕೃಶಳಾಗಿ, ಕಡೆಗೊಂದು ದಿನ ಆ ಸುಕುಮಾರಿ ಸತ್ತೇಹೋದಳು ಪಾಪ! ಆಗ ಆ ಮಹಾರಾಜ ತನ್ನ ಮಗಳಿಗೆ 'ಪಾರಿಜಾತ'ವಾಗಿ ಹುಟ್ಟುವಂತೆ ವರಕೊಟ್ಟನಂತೆ. ಅದಕ್ಕೇ ಅಂತೆ, ಪಾರಿಜಾತದ ಟೊಂಗೆ, ಎಲೆ ಬಿಳುಚಿಕೊಂಡಿರುವುದು. ಅದಕ್ಕೇ ಅಂತೆ, ಅವಳು ರಾತ್ರಿ ಮಾತ್ರ ಅರಳಿ, ಸೂರ್ಯನ ಮೋರೆ ಕಾಣುವ ಮೊದಲೇ ಉದುರಿಹೋಗುವುದು... ಪಾರಿಜಾತದ ತೊಟ್ಟಿನ ಬಣ್ಣ ಕೂಡ ಸೂರ್ಯನದ್ದೇ!! 



"ಇದೆಲ್ಲಾ ನಿಜವೇನೆ?" ಅಂತ ಇವಳನ್ನು ಕೇಳಿದರೆ,  ಒಮ್ಮೆ "ಹ್ಞೂ ಕಣೆ" ಅನ್ನೋಹಾಗೆ; ಮತ್ತೊಮ್ಮೆ "ಏನೋಪ್ಪ,..ನನಗೊಂದೂ ನೆನಪಿಲ್ಲ" ಅನ್ನೋಹಾಗೆ ತಲೆ ಆಡಿಸುತ್ತ ನಿಂತಿದ್ದಾಳೆ. ನಿಮ್ಮ ಮನೆಯಂಗಳದಲ್ಲೂ ಇಂಥ ಹುಡುಗಿಯಿದ್ದರೆ ಆಗಾಗ ಮಾತಾಡಿಸುತ್ತಿರಿ. ಅವಳ ಕಥೆ ಏನೋ ಎಂತೋ... 

ಛಾಯಾಚಿತ್ರ : ಚರಿತಾ







ಬೆಳಬೆಳಗ್ಗೆ, ಬೆಳಕು ಕಣ್ಬಿಡುವ ಹೊತ್ತಿಗೆ ಸರಿಯಾಗಿ, ಪಾರಿಜಾತದಂಥದ್ದೆ ಬಿಳಿಜುಬ್ಬ ತೊಟ್ಟು, ದಿನಾಲು ತಪ್ಪದೆ ಹೂವು ಆಯಲು ಒಬ್ಬ ಅಜ್ಜ ಬರುತ್ತಿದ್ದದ್ದು ಗಮನಿಸಿದ್ದೆ. ನನ್ನ ಬಟ್ಟಲಿಗೂ ಸಾಕಾಗುವಷ್ಟು ಉಳಿಯುತ್ತಿದ್ದರೂ, ಯಾಕೊ ನನ್ನ ಮರದ ಜೊತೆಗಿನ ಹೊಸ ಸ್ನೇಹಸಂಬಂಧ ನನಗೆ ಅಷ್ಟಾಗಿ ಹಿಡಿಸಿರಲಿಲ್ಲ.  ಈ ವಿಷಯ ಹೇಗೆ ತಿಳಿಯಿತೋ ಏನೊ, ಈಗ ತುಂಬಾ ದಿನಗಳಿಂದ ಆ ಅಜ್ಜನ ಪತ್ತೆಯಿಲ್ಲ. ದಿನಾಲು ಪ್ಲಾಸ್ಟಿಕ್ ಕವರ್ ತಂದು ಹೂವು ತುಂಬಿಕೊಂಡು ಹೋಗುತ್ತಿದ್ದ ಅಜ್ಜ ಇಲ್ಲೆಲ್ಲಾದರೂ ಕಂಡರೆ, "ಈಗ ಯಾಕೆ ಬರ್ತಿಲ್ಲಜ್ಜ?" ಅಂತ ಕೇಳಬೇಕು ನಾನು... ಯಾಕೋ ಕಂಡೇ ಇಲ್ಲ ಅವರು ...






ಛಾಯಾಚಿತ್ರ : ಚರಿತಾ





ಮಂಗಳವಾರ, ಜುಲೈ 9, 2013

ಪುಟಗಳಿಗೆ ಕಿಟಕಿಗಳಿಲ್ಲ...

ಚಿತ್ರ : ಚರಿತಾ


      ಅನಿಸಿದ್ದೆಲ್ಲ ಬರೆಯಲಾಗದ ಹಾಗೆ, ಬರೆದದ್ದೆಲ್ಲ ತಿರುಗಿನೋಡಲಾಗದ ಹಾಗೆ, ನನಗೆ ಕಂಡ ಕಥೆಗಳೆಲ್ಲ ನೆನ್ನೆ ಮೊನ್ನೆಗಳಲ್ಲಿ ಸರಿದುಹೋಗುತ್ತ, ಮತ್ತೆ ನನ್ನ ಕಡೆ ತಲೆಯೆತ್ತಿ ನೋಡಲಾಗದೆ, ದನಿಮಾಡಿ ಕರೆಯಲಾಗದೆ, ನಿರ್ಲಿಪ್ತತೆಯ ಮುಸುಕುಹೊದ್ದು ವಿಪರೀತ ಛಳಿಯ ನೆಪ ಹೇಳುತ್ತಿವೆ. ಮಾತು ಮರೆತು ಕೂತ ಲೈಬ್ರರಿ ಕಪಾಟಿನ ಪುಸ್ತಕಗಳು ಕಣ್ಣು ತೆರೆದು ಮುಚ್ಚುವುದು ಧೂಳು ಒರೆಸುವಾಗ ಮಾತ್ರ. ಅವುಗಳ ಕಥೆ ಕೇಳುವುದಿರಲಿ, 'ಹೇಗಿದೀಯ' ಅಂತ ತೋರಿಕೆಯ ಒಂದು ಸದ್ದು ಕೂಡ ಹೊರಡದೆ, ಅಕ್ಷರಗಳು ಅಲುಗಾಡುತ್ತಿಲ್ಲ. ಅಚ್ಚುಕಟ್ಟಾಗಿ ಸಾಲಾಗಿ ನಿಂತ ಅಕ್ಷರಗಳಿಗೆ ಪುಟಗಳಿಂದ ಹೊರಪುಟಿಯಲು ಕಿಟಕಿಗಳಿಲ್ಲ. ಕಥೆ ಹೇಳುವ ಅವಕಾಶ ಸಿಗದ ಚಂದದ ಹೊದಿಕೆಯ ಪುಸ್ತಕಗಳಿಗೆ ಮೋಕ್ಷವಾದರೂ ಹೇಗೆ ಸಿಗಬೇಕು?!

     ಹಿತ್ತಲಿನ 'ಬಟರ್ ಫ್ರೂಟ್' ಮರ ಉದುರಿಸುವ ಒಣ ಎಲೆಗಳನ್ನೆಲ್ಲ ಗುಡಿಸಿ ಗುಡ್ಡೆಹಾಕುವಾಗಲೂ ಅವುಗಳ ಬಗ್ಗೆ ಹೀಗೆ ಅನಿಸುತ್ತೆ. ಹೇಗೋ ಅವುಗಳಿಗಿಷ್ಟಬಂದಹಾಗೆ ತಲೆಕೊಟ್ಟು, ಕಾಲುಚಾಚಿ ಬಿದ್ದುಕೊಂಡಿರಲೂ ಬಿಡುತ್ತಿಲ್ಲ ನಾನು. ತಮ್ಮಷ್ಟಕ್ಕೆ ಕಣ್ಣುಮುಚ್ಚಿ ಮಣ್ಣುಮುಕ್ಕುವ ಅವುಗಳ ಕೊನೆಯ ಆಸೆಗೂ ನನ್ನ ಅನುಮತಿ ಬೇಕಾಗಿದೆ. ಅಷ್ಟಗಲ ಜಾಗದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರೋದು 'ಚೆನ್ನಾಗಿ ಕಾಣಲ್ಲ' ಅಂತ ತೀರ್ಪು ಕೊಟ್ಟು, ಅವುಗಳನ್ನೆಲ್ಲ ಅನಾಮತ್ತಾಗಿ ತಿಪ್ಪೆಗೆ ಸಾಗಿಸಿಬಿಡುವ ನಿರ್ಧಾರ ಯಾಕೋ ಸರಿಯಲ್ಲ ಅನಿಸುತ್ತಿರುತ್ತೆ.

   
ಇಂಟರ್ನೆಟ್ ಚಿತ್ರ


         ಮನೆಮುಂದಿನ ಲಾನ್ನಲ್ಲಿ ಆಗಾಗ ತಲೆಯೆತ್ತಿ ನಿಲ್ಲುವ ಥರಾವರಿ ಗಿಡಗಳಿಗೆ ಪಾಪ, ಬೈಗುಳದಂಥ ಹೆಸರು-'ಕಳೆ'. ಅವುಗಳಿಗೆ ನಗುವ, ತೊನೆದಾಡುವ ಯಾವ ಹಕ್ಕೂ ಇಲ್ಲ. ಅಕಸ್ಮಾತ್ ಅಂಥ ಹಕ್ಕು-ಪಕ್ಕು ಅಂತೇನಾದರೂ ಇದ್ದರೆ ನಮ್ಮ ಕಣ್ಣಿಗೆ ಕಾಣದ ಹಾಗೆ ಒಂದೆರಡು ದಿನ ಇದ್ದು ಹೋಗಿಬಿಟ್ಟರೆ ಕ್ಷೇಮ. ನೀಟಾಗಿ, ಟಿಪ್ಟಾಪಾಗಿರಬೇಕಾದ ನಮ್ಮ ಲಾನ್ನಲ್ಲಿ ಪಡ್ಡೆ ಹೈಕಳ ಥರ ಚಡ್ಡಿ ಏರಿಸುತ್ತ, ಗೊಣ್ಣೆ ಒರೆಸುತ್ತ, ಕೇಕೆ ಹಾಕೋದು ಕಂಡರೆ ಅಷ್ಟೆ - ಬುಡಸಮೇತ ಗೇಟ್ ಪಾಸ್ ಗ್ಯಾರಂಟಿ. ಇದೂ ಕೂಡ ಯಾಕೊ ಫ್ಯೂಡಲ್ ಮನಸ್ಥಿತಿಯ ತರ್ಕದ ಹಾಗಿದೆ... ಅನುಕೂಲಗಳ ಸುತ್ತ ಹೆಣೆದುಕೊಳ್ಳುವ ತರ್ಕಗಳಿಗೆ ನಿಜಕ್ಕೂ ಇಂಥದ್ದೇ ಬಣ್ಣ, ರೂಪ, ಅಳತೆಯಿರಬೇಕೆಂದೇನಿಲ್ಲ. ಒಂದು ಅನುಕೂಲದ ತಳಪಾಯ ನೂರು ಸಮಾಧಿಗಳದ್ದಾಗಿರಬಹುದು. ಅಬ್ಬರಕ್ಕೆ ಒಗ್ಗಿಕೊಂಡ ನಮ್ಮ ಕಿವಿಗಳಿಗೆ ಪಿಸುದನಿಯ ಆಲಾಪ ಸೋಕದೆಯೇ ಕಳೆದುಹೋಗಬಹುದು.. ಅಬ್ಬರಿಸದ, ಅರ್ಥವಾಗದ ಜಗತ್ತಿನ ಜೊತೆಗೆ ಲಾಭದ ಹೊರತಾದ ಸ್ನೇಹ ನಮಗೆ ಸಾಧ್ಯವಾಗುವುದಾದರೂ ಯಾವಾಗ?!


ಇಂಟರ್ನೆಟ್ ಚಿತ್ರ


        ಈ ಸ್ಟೆಡ್ಲರ್ ಕಲರ್ ಪೆನ್ಗಳಿಗೆ ಹೀಗೆ ನನ್ನ ಡೈರಿಯ ಪುಟಗಳನ್ನು ತುಂಬುವುದು ಇಷ್ಟವೊ, ಚಿತ್ರ ಬರೆಯುವುದಿಷ್ಟವೊ ಅಥವಾ ಸುಮ್ಮನೆ ಗೀಚುತ್ತ ಕೂರುವುದಿಷ್ಟವೊ - ಕೇಳಿದವರ್ಯಾರು? ಅಷ್ಟು ಚಂದದ ನನ್ನ ಪೆನ್ಬಾಕ್ಸಲ್ಲಿ ಇವುಗಳಿಗೆ ಜಾಗ ಕೊಟ್ಟಿರೋದೇ ನಾನು ಕರುಣಿಸಿರುವ ಭಾಗ್ಯ ಅಂತ ಇವು ತಿಳಿಯಬೇಕು ಅನ್ನೋದು ನನ್ನ ಎಣಿಕೆಯಿರಬಹುದು! ನಮ್ಮದೇ ತೋಟದ ಗುಲಾಬಿಗಿಡದಲ್ಲಿ ತನ್ನಷ್ಟಕ್ಕೆ ನಗುತ್ತಲಿದ್ದು ಒಮ್ಮೆ ಉದುರಿಹೋಗುವ ಹೂವು ನನಗೆ ಹೇಳಿಯೇ ಹೋಗಬೇಕೆಂದೇನೂ ಇಲ್ಲ. ಆದರೂ ಕಣ್ತಪ್ಪಿಸಿಹೋದವುಗಳಿಗೆ ಮೋಕ್ಷವೇ ಇಲ್ಲ ಅಂತ ಸ್ಯಾಡಿಸ್ಟ್ ಥರ ಉರಿದುಬೀಳೋದು ಅಷ್ಟೇನೂ ಅಪಾಯಕಾರಿಯಲ್ಲ ಅಂತ ಸಮಾಧಾನ ಮಾಡಿಕೊಳ್ತೀನಿ!

     ಯಾವತ್ತಿಗೂ ಬೆಳಕು ಕಾಣದ ಪುಟಗಳಿಗೆ; ಧೂಳು ಒರೆಸಲು ಕೈಗೆಟುಕದ ಕಪಾಟಿನ ಸಂದಿಗಳಿಗೆ; ಇಷ್ಟಪಟ್ಟು ತಂದು, ಬೀರುವಿನಲ್ಲಿ ಮಡಚಿಟ್ಟು  ಉಡದೆ, ತಗೆದು ಕೂಡ ನೋಡದೆ ಹಳೆಯದಾಗಿಬಿಟ್ಟಿರುವ ಬಟ್ಟೆಗಳಿಗೆ, ಶೋಕೇಸಿನೊಳಗೆ ಗಾಜಿನ ಲೋಟಗಳ ಮರೆಯಲ್ಲಿ ಅಷ್ಟು ವರ್ಷಗಳಿಂದ ಅನಾಥವಾಗಿ ಕುಳಿತುಬಿಟ್ಟಿರುವ ಆ ಬಟ್ಟಲಿಗೆ - ನಿಜಕ್ಕೂ ಏನನಿಸುತ್ತಿರಬಹುದು? ಇವುಗಳೆಲ್ಲ ಗಾಢ ನಿದ್ದೆಗೆ ಜಾರಿರಬಹುದಾ? ನನ್ನ ಜೊತೆ ಮುನಿಸಿಕೊಂಡು ಮಾತುಬಿಟ್ಟು, ಕೊನೆಗೆ ಮಾತಾಡುವುನ್ನೇ ಮರೆತುಬಿಟ್ಟಿರಬಹುದಾ? ಇದು ಆರ್ತತೆಯ ಪರಮಾವಧಿಯ ಅಗಾಧ ಮೌನವೇ ಇರಬಹುದು,.. ಪ್ರತಿಭಟನೆಯ ಕಟ್ಟಕಡೆಯ ತಂತ್ರವೂ ಆಗಿರಬಹುದು. ಇವುಗಳು ಇನ್ನೂ ನನ್ನ ಕರುಣೆಗಾಗಿ ಕಾಯುತ್ತಿರಬಹುದಾ ಅಥವಾ ಬುದ್ಧನ ಗುರುಗಳ ಹಾಗೆ ನನ್ನ ಕಡೆಗೇ ಕರುಣೆಯಿಂದ ಮುಗುಳ್ನಗುತ್ತಿರಬಹುದಾ?!

ಇಂಟರ್ನೆಟ್ ಚಿತ್ರ

       "ಹೀಗ್ಯಾಕೆ  ಸುಮ್ಮನಿದ್ದುಬಿಟ್ಟಿದ್ದೀಯ? ಮಾತಾಡು, ಏನಾದರೂ ಬರಿ, ತಂತಿ ಮೀಟಿ ರಾಗತೆಗಿ, ಸದ್ದುಬರುವಂತೆ ಪಾದ ಒತ್ತಿ ನಡೆದಾಡು, ನೀರು ಗುಟುಕರಿಸುವಾಗ ಬೇಕಂತಲೇ ಗಂಟಲು ಕೊಂಕಿಸು, ಉಸಿರಾಟ ನೆನಪಾದಾಗೆಲ್ಲ ಸ್ವಲ್ಪ ಜೋರಾಗಿ ಉಸಿರೆಳೆದುಕೊ, ಆಗಾಗ ಕನ್ನಡಿ ನೋಡಿಕೊಂಡು ಮುಖಯಿದೆಯಾ ಅಂತ ಖಾತ್ರಿಮಾಡಿಕೊ, ಸದ್ದು-ಗಿದ್ದು ಮಾಡದೆ ಹಾಗೇ ಹೋಗಿಬಿಟ್ಟರೆ ನಿನ್ನಪಾಲಿನ ಮೋಕ್ಷದ ಪ್ಯಾಕೇಜ್ ವಿನಾಕಾರಣ ವೇಸ್ಟ್ ಆಗೋಗುತ್ತೆ ನೋಡು..." ಅಂತ ಒಂದೇಸಮ ವರಾತ ತೆಗೆಯುವ ಲೌಡ್ ಸ್ಪೀಕರುಗಳಿಗೆ ಸಣ್ಣಗೆ  'ಶಟಪ್' ಹೇಳಿ,  ಹುಳಿಮೊಸರಿಗೆ ಮುತ್ತಿರುವ ನುಸಿಗಳನ್ನು ಓಡಿಸುತ್ತ, "... ನೆನ್ನೆ ನೆನ್ನೆಗೆ, ಇಂದು ಇಂದಿಗೆ, ಇರಲಿ ನಾಳೆಯು ನಾಳೆಗೆ..."  ಗುನುಗುತ್ತಿದ್ದೀನಿ.

     ಬೆಳಕು ಕಾಣದ ಆ ಪುಟಗಳಿಗೆ ಗರ್ಭದ ಕತ್ತಲಿನ ಮೌನ ದೊರಕಲಿ...
     ಈ ನಗುವಿನಂಥ ನಗು ಕೆಲವೊಮ್ಮೆ ನನಗಾದರೂ ಅರ್ಥವಾಗಲಿ...